Home > ಜನಪದ ಕತೆ-ಗೀತೆಗಳು > ಧರಣಿ ಮಂಡಲ ಮಧ್ಯದೊಳಗೆ

ಧರಣಿ ಮಂಡಲ ಮಧ್ಯದೊಳಗೆ

ತಬ್ಬಲಿಯು ನೀನಾದೆ ಮಗನೆ ಚಿತ್ರದಲ್ಲಿ ಬರುವ ಗೋವಿನ ಹಾಡನ್ನು ಯಥಾವತ್ತಾಗಿ ಕೆಳಗೆ ಕೊಟ್ಟಿದ್ದೇನೆ. ಪೂರ್ತಿ ಹಾಡಿಗೆ ಇಲ್ಲಿ ಕ್ಲಿಕ್ಕಿಸಿ.


ಧರಣಿ ಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ಣಾಟ ದೇಶದೋಳಿರುವ
ಕಾಳಿಂಗನೆಂಬ ಗೊಲ್ಲನ ಪರಿಯನೆಂತು ಪೇಳ್ವೆನು

ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು 
ಬಳಿಗೆ ಕರೆದನು ಹರುಶದಿ
 
ಗಂಗೆ ಬಾರೆ ಗೌರಿ ಬಾರೆ
ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೆ
ಎಂದು ಗೊಲ್ಲನು ಕರೆದನು

ಗೊಲ್ಲ ಕರೆದ ದನಿಯ ಕೇಳಿ
ಎಲ್ಲ ಹಸುಗಳು ಬಂದು ನಿಂದು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ

     ||ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು||

ಹಬ್ಬಿದಾ ಮಲೆ ಮಧ್ಯದೊಳಗೆ
ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ
ಕಿಬ್ಬಿಯೊಳು ತಾನಿದ್ದನು

ಮೊರೆದು ರೋಶದಿ ಗುಡುಗುತಾ ಹುಲಿ
ಗುಡುಗುಡಿಸಿ ಭೋರಿಡುತ ಚಂಗನೆ
ಗುಡುಗಲೆರಗಿದ ರಭಸಕಂಜಿ
ಚೆದರಿ ಹೋದವು ಹಸುಗಳು

ಪುಣ್ಯಕೋಟಿ ಎಂಬ ಹಸುವು
ತನ್ನ ಕಂದನ ನೆನೆದುಕೊಂಡು
ಮುನ್ನ ಹಾಲನು ಕೊಡುವೆನೆನುತ
ಚೆಂದದಿ ತಾ ಬರುತಿರೆ

ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು

ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ
ಖೂಳ ವ್ಯಾಘ್ರನು ಕೂಗಲು

ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯೊಳಗೆ
ಒಂದು ನಿಮಿಶದಿ ಮೊಲೆಯ ಕೊಟ್ಟು
ಬಂದು ಸೇರುವೆ ನಿಲ್ಲಿಗೆ

ಹಸಿದ ವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯ ನಾಡುವೆ ಎಂದಿತು

ಸತ್ಯವೇ ನಮ್ಮ ತಾಯಿ ತಂದೆ
ಸತ್ಯವೇ ನಮ್ಮ ಬಂಧು ಬಳಗ
ಸತ್ಯ ವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನು

     ||ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು||

ಕೊಂದು ತಿನ್ನುವೆನೆಂಬ ಹುಲಿಗೆ
ಚೆಂದದಿಂದ ಭಾಷೆ ಕೊಟ್ಟು
ಕಂದ ನಿನ್ನನು ನೋಡಿ ಪೋಗುವೆ
ನೆಂದು ಬಂದೆನು ದೊಡ್ಡಿಗೆ

ಆರ ಮೊಲೆಯನು ಕುಡಿಯಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರ ಸೇರಿ ಬದುಕಲಮ್ಮ
ಆರು ನನಗೆ ಹಿತವರು

ಅಮ್ಮಗಳಿರಾ ಅಕ್ಕಗಳಿರಾ
ಎನ್ನ ತಾಯೊಡ ಹುಟ್ಟುಗಳಿರಾ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನು

ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ಒದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನು

ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ಋಣ ತೀರಿತೆಂದು
ತಬ್ಬಿಕೊಂಡಿತು ಕಂದನ

     ||ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು||

ಗೋವು ಕರುವನು ಬಿಟ್ಟು ಬಂದು
ಸಾವಕಾಶವ ಮಾಡದಂತೆ
ಗವಿಯ ಬಾಗಿಲ ಸೇರಿನಿಂತು
ತವಕದಲಿ ಹುಲಿಗೆಂದಿತು

ಖಂಡವಿದೆಕೊ ಮಾಂಸವಿದೆಕೊ
ಗುಂಡಿಗೆಯ ಬಿಸಿರಕ್ತವಿದೆಕೊ
ಚಂಡವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು

ಪುಣ್ಯಕೋಟಿಯ ಮಾತ ಕೇಳಿ
ಕಣ್ಣನೀರನು ಸುರಿಸಿ ನೊಂದು
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನು

ಎನ್ನ ಒಡಹುಟ್ಟಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಎನ್ನುತಾ ಹುಲಿ ಹಾರಿ ನೆಗೆದು
ತನ್ನ ಪ್ರಾಣವ ಬಿಟ್ಟಿತು

     ||ಸತ್ಯವೇ ಭಗವಂತನೆಂಬ ಪುಣ್ಯಕೋಟಿಯ ಕತೆಯಿದು||

ಪುಣ್ಯಕೋಟಿಯು ನಲಿದು ಕರುವಿಗೆ
ಉಣ್ಣಿಸೀತು ಮೊಲೆಯ ಬೇಗದಿ
ಚೆನ್ನಗೊಲ್ಲನ ಕರೆದು ತಾನು
ಮುನ್ನ ತಾದಿಂತೆಂದಿತು

ಎನ್ನ ವಂಶದ ಗೋವ್ಗಳೊಳಗೆ
ನಿನ್ನ ವಂಶದ ಗೊಲ್ಲರೊಳಗೆ
ಮುನ್ನ ಪ್ರತಿ ಸಂಕ್ರಾಂತಿಯೊಳಗೆ
ಚೆನ್ನ ಕೃಷ್ಣನ ಭಜಿಸಿರಿ

ಈವನು ಸೌಭಾಗ್ಯ ಸಂಪದ
ಭಾವ ಜಾತಿಪ ಕೃಷ್ಣನು

  1. December 18, 2008 at 5:31 am | #1

    good sirr… Olle kelsa maadideeri :)

  2. balaglobal
    December 18, 2008 at 12:47 pm | #2

    ಮಹೇಶ್,
    ಪ್ರತಿಕ್ರಿಯೆಗೆ ಧನ್ಯವಾದಗಳು.

    ಸ್ನೇಹದೊಂದಿಗೆ
    -ಬಾಲ

  3. radha, malur
    August 19, 2009 at 10:13 am | #3

    intha kathegalu innu barabeku janarige thilisabeku. kettadannu bayasuvavarige olleyadannu bayasabeku aga kettavaru olleyavaragi badalaguthare

  4. balaglobal
    August 19, 2009 at 12:09 pm | #4

    ರಾಧಾ ಅವರೆ,
    ಧನ್ಯವಾದಗಳು.

  1. No trackbacks yet.